ಶ್ರೀಶ್ರೀನಿವಾಸಪುರ:ಭಕ್ತಿ, ಶ್ರದ್ಧೆ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ ಅದ್ಧೂರಿಯಾಗಿ ಚಾಮುಂಡೇಶ್ವರಿ ಜಯಂತ್ಯುತ್ಸವ ಆಚರಿಸಲಾಯಿತು. ಶ್ರೀನಿವಾಸಪುರದ ಗ್ರಾಮ ದೇವತೆ ಶ್ರೀ ಚೌಡೇಶ್ವರಿ ದೇವಿಗೆ ವಿಶೇಷ ಅಭಿಷೇಕ, ಅಲಂಕಾರ, ಅರ್ಚನೆ ಹಾಗೂ ವಿವಿಧ ಧಾರ್ಮಿಕ ವಿಧಿವಿಧಾನಗಳು ನೆರವೇರಿಸಲಾಯಿತು. ಬೆಳಗ್ಗಿನಿಂದಲೇ ದೊಡ್ಡ ಸಂಖ್ಯೆಯಲ್ಲಿ ಭಕ್ತರು ದೇವಾಲಯಕ್ಕೆ ಆಗಮಿಸಿ ದೇವಿಯ ದಿವ್ಯ ದರ್ಶನ ಪಡೆದು ಇಷ್ಟಾರ್ಥ ಸಿದ್ಧಿಗಾಗಿ ಪ್ರಾರ್ಥಿಸಿದರು. ದೇವಾಲಯದ ಪ್ರಧಾನ ಅರ್ಚಕರಾದ ಸುಬ್ರಮಣ್ಯಂ ಅವರು ವಿವಿಧ ಬಗೆಯ ಹೂವುಗಳಿಂದ ದೇವಿಯನ್ನು ವಿಶೇಷವಾಗಿ ಅಲಂಕಾರ ಮಾಡಿದ್ದು, ಅಲಂಕೃತ ರೂಪದಲ್ಲಿ ದೇವಿಯ ದರ್ಶನ ಭಕ್ತರನ್ನು ಭಕ್ತಿಪರಶರನ್ನಾಗಿಸಿತು. ಜಯಂತ್ಯುತ್ಸವದ ಹಿನ್ನೆಲೆಯಲ್ಲಿ ದೇವಾಲಯದ ಆವರಣವನ್ನು ವಿದ್ಯುತ್ ದೀಪಾಲಂಕಾರ ಹಾಗೂ ತಳಿರು ತೋರಣಗಳಿಂದ ಅಲಂಕರಿಸಲಾಗಿತ್ತು. ಭಕ್ತರಿಗೆ ಯಾವುದೇ ತೊಂದರೆಯಾಗದಂತೆ ಊರಿನ ಯುವಕ ಮಂಡಳಿ ಸದಸ್ಯರು ಅಗತ್ಯ ಸೌಲಭ್ಯಗಳನ್ನು ಕಲ್ಪಿಸಿ ದರ್ಶನ ವ್ಯವಸ್ಥೆಯನ್ನು ಸುಗಮವಾಗಿ ನಡೆಯಲು ಅನವು ಮಾಡಿದ್ದರು.
ಜಯಂತ್ಯುತ್ಸವದ ಅಂಗವಾಗಿ ಪ್ರಸಾದ ವಿತರಣೆ ಅನ್ನಧಾನ ಏರ್ಪಡಿಸಲಾಗಿತ್ತು. ಭಕ್ತರು ಕುಟುಂಬ ಸಮೇತರಾಗಿ ಪಾಲ್ಗೊಂಡು ದೇವರ ಆಶೀರ್ವಾದ ಪಡೆದರು.ಭಕ್ತರ ಸಂಭ್ರಮದ ವಾತಾವರಣದಲ್ಲಿ ಶ್ರೀ ಚಾಮುಂಡೇಶ್ವರಿ ಜಯಂತ್ಯುತ್ಸವವು ಅತ್ಯಂತ ವಿಜೃಂಭಣೆಯಿಂದ ನೆರವೇರಿತು.

ಯಲ್ದೂರು ಪಟಾಲಮ್ಮನ ಗುಡಿಯಲ್ಲಿ ಜಯಂತ್ಯುತ್ಸವ
ತಾಲೂಕಿನ ಪ್ರಮುಖ ಹೋಬಳಿ ಕೇಂದ್ರ ಯಲ್ದೂರಿನಲ್ಲಿ ನಲೆಸಿರುವ ಗ್ರಾಮಸ್ಥರ ಆರಾಧ್ಯ ದೇವರು ಶ್ರೀ ಪಟಾಲಮ್ಮ ದೇವಾಲಯಲ್ಲಿ ಶ್ರೀ ಚಾಮುಂಡೇಶ್ವರಿ ಜಯಂತ್ಯುತ್ಸವ ಭಕ್ತಿ ಭಾವದಿಂದ ಆಚರಿಸಲಾಯಿತು. ಸಂಜೆ ಶ್ರೀ ಪಟಾಲಮ್ಮದೇವಿಯನ್ನು ಭವ್ಯವಾಗಿ ಅಲಂಕರಿಸಿದ ಹೂವಿನ ಪಲ್ಲಕ್ಕಿಯಲ್ಲಿ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಲಾಯಿತು. ದೇವರ ಪಲ್ಲಕ್ಕಿ ಸಾಗುವ ಮಾರ್ಗದುದ್ದಕ್ಕೂ ಭಕ್ತರು ಆರತಿ ಬೆಳಗಿ, ಭಕ್ತಿಭಾವದಿಂದ ಸ್ವಾಗತಿಸಿದರು. ಭಕ್ತರ ಸಮ್ಮುಖದಲ್ಲಿ ಮುತ್ತಿನ ಪಲ್ಲಕ್ಕಿ ಉತ್ಸವ ಯಶಸ್ವಿಯಾಗಿ ನೆರವೇರಿತು.



